BENGALURU : (RMS INSTITUTE OF MANAGEMENT & SCIENCE) ಆರ್ಎಂಎಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್(ಆರ್ಎಂಎಸ್ಐಎಂಎಸ್), ಬೆಂಗಳೂರು ಸಂಸ್ಥೆಯಲ್ಲಿ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ನಡೆಯಿತು. ಅಂತಿಮ ವರ್ಷದ ಬಿಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣದ ಮಹತ್ವದ ಘಟ್ಟವನ್ನು ಈ ಕಾರ್ಯಕ್ರಮ ಸ್ಮರಣೀಯಗೊಳಿಸಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞರು, ಜೈನ್ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕೆ. ವಿ. ರಾಮರಾವ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು ನಿರಂತರ ಕಲಿಕೆ, ನೈತಿಕ ನಾಯಕತ್ವ, ವೃತ್ತಿಪರ ಶ್ರೇಷ್ಠತೆ ಹಾಗೂ ವೇಗವಾಗಿ ಬದಲಾಗುತ್ತಿರುವ ಜಾಗತಿಕ ಪರಿಸ್ಥಿತಿಗೆ ಹೊಂದಿಕೊಳ್ಳುವ ಸಾಮರ್ಥ್ಯದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಶೈಕ್ಷಣಿಕ ಅರ್ಹತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ ಪುನೀತ್ ಕೆ ಅವರು ಪದವೀಧರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಅವರ ಯಶಸ್ಸಿನ ಹಿಂದೆ ಶ್ರಮಿಸಿದ ಅಧ್ಯಾಪಕರು ಹಾಗೂ ಪೋಷಕರ ಪಾತ್ರವನ್ನು ಕೊಂಡಾಡಿದರು. ಸಂಸ್ಥೆಯು ಶೈಕ್ಷಣಿಕ ಶ್ರೇಷ್ಠತೆ, ಉದ್ಯಮೋದ್ಯಮಕ್ಕೆ ಅಗತ್ಯವಾದ ಕೌಶಲ್ಯಗಳ ಅಭಿವೃದ್ಧಿ, ಮೌಲ್ಯಾಧಾರಿತ ಶಿಕ್ಷಣ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಚಂದ್ರಿಕಾ ಶ್ರೀನಿವಾಸ್ ಅವರು ವಿಶೇಷವಾಗಿ ಉಪಸ್ಥಿತರಿದ್ದರು. ಅವರು ಆರ್ ಎಂ ಎಸ್ ಶಿಕ್ಷಣ ಸಮೂಹ ದ ಸಂಸ್ಥೆಯ ನಿರ್ದೇಶಕರಾಗಿದ್ದು, ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಎಂ.ಶ್ರೀನಿವಾಸ್ ಅವರ ಪುತ್ರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ತಂದೆಯವರ ಶಿಕ್ಷಣದ ಮೇಲಿನ ಬದ್ಧತೆ, ದೂರದೃಷ್ಟಿ ಮತ್ತು ಮೌಲ್ಯಗಳನ್ನು ಸ್ಮರಿಸಿದರು. ಅವರ ಮಾರ್ಗದರ್ಶನ ಹಾಗೂ ಪರಿಶ್ರಮವೇ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯಾಗಿದೆ ಎಂದು ತಿಳಿಸಿದ ಅವರು, ಗುಣಮಟ್ಟದ ಶಿಕ್ಷಣದ ಮೂಲಕ ಮುಂದಿನ ಪೀಳಿಗೆಯನ್ನು ರೂಪಿಸುವ ಕಾರ್ಯದಲ್ಲಿ ಸಂಸ್ಥೆ ಸದಾ ಮುಂಚೂಣಿಯಲ್ಲಿರಲಿದೆ ಎಂದು ಹೇಳಿದರು.

