ಬೆಂಗಳೂರು (Bengaluru) ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು (Rajiv Gandhi University of Health Sciences) ಕಳೆದ ಮೂರು ದಶಕಗಳಲ್ಲಿ ಆರೋಗ್ಯ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಹಾಗೂ ಸಾರ್ವಜನಿಕ ಆರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಕರ್ನಾಟಕ ಹಾಗೂ ದೇಶದ ಆರೋಗ್ಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಕರ್ನಾಟಕ ರಾಜ್ಯಪಾಲ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Gehlot) ಅವರು ಹೇಳಿದರು.
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ, ಮಾದಕ ರಹಿತ ಭಾರತ ಸಮ್ಮೇಳನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಉಪಸ್ಥಿತಿಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಉಪಸ್ಥಿತಿಯು ವಿಶ್ವವಿದ್ಯಾಲಯ ಕುಟುಂಬಕ್ಕೆ ಹಾಗೂ ಕರ್ನಾಟಕ ರಾಜ್ಯಕ್ಕೆ ವಿಶೇಷ ಗೌರವ ತಂದಿದೆ ಎಂದು ರಾಜ್ಯಪಾಲರು ಹೇಳಿದರು.


ಈ ವರ್ಷದ ಸಂಸ್ಥಾಪನಾ ದಿನವನ್ನು ಮಾದಕ ರಹಿತ ಭಾರತ ಸಮ್ಮೇಳನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯೊಂದಿಗೆ ಸಂಯೋಜಿಸಿ ಆಚರಿಸಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ರಾಜ್ಯಪಾಲರು ಹೇಳಿದರು. 
ಭಾರತವು ಯುವಶಕ್ತಿಯ ರಾಷ್ಟ್ರವಾಗಿದ್ದು, ದೇಶದ ಅಭಿವೃದ್ಧಿಗೆ ಯುವಜನರ ಶಕ್ತಿಯೇ ಪ್ರಮುಖ ಆಧಾರವಾಗಿದೆ. ಆದ್ದರಿಂದ ಯುವಜನರನ್ನು ಆರೋಗ್ಯವಂತರಾಗಿ, ಜಾಗೃತರಾಗಿ ಹಾಗೂ ಮಾದಕ ವ್ಯಸನದಿಂದ ಮುಕ್ತರಾಗಿ ಬೆಳೆಸುವುದು ಸಮಾಜದ ಎಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ಮಾದಕ ವ್ಯಸನವು ವೈಯಕ್ತಿಕ ಸಮಸ್ಯೆ ಮಾತ್ರವಲ್ಲದೆ ಸಾಮಾಜಿಕ, ಆರ್ಥಿಕ ಹಾಗೂ ಆರೋಗ್ಯ ಕ್ಷೇತ್ರಗಳಿಗೂ ಸವಾಲಾಗಿದೆ. ಈ ಪಿಡುಗಿನ ನಿರ್ಮೂಲನೆಗೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಪೋಷಕರು, ಸ್ವಯಂಸೇವಾ ಸಂಘಟನೆಗಳು ಹಾಗೂ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಅವರು ಕರೆ ನೀಡಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ “ಮಾದಕ ದ್ರವ್ಯ ಮುಕ್ತ ಭಾರತ” ಸಂಕಲ್ಪವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕುಟುಂಬ ಹಾಗೂ ಸಮಾಜದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಯುವಜನರನ್ನು ಮಾದಕ ವ್ಯಸನದಿಂದ ದೂರವಿಡಲು ರಾಜ್ಯ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು ಹಾಗೂ ಸಮಾಜದ ವಿವಿಧ ವಲಯಗಳು ಕೈಗೊಂಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಈ ಕುರಿತು ಕಾರ್ಯಕ್ರಮವನ್ನು ಆಯೋಜಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ದಿಶಾಬೋಧ್ ಪ್ರತಿಷ್ಠಾನ ಹಾಗೂ ಮಾದಕ ವಸ್ತು ನಿಯಂತ್ರಣ ಬ್ಯೂರೋವನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಸಿಎಂ ಡಿ. ಕೆ. ಶಿವಕುಮಾರ್, ಸಚಿವರುಗಳಾದ ಡಾ. ಶರಣಪ್ರಕಾಶ್ ಆರ್. ಪಾಟೀಲ, ಯು.ಟಿ. ಖಾದರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

