ಸಂಡೂರು(Sandur): ಜನವಿರೋಧಿ, ರೈತ ವಿರೋಧಿ, ಯುವಕ ಹಾಗೂ ದಲಿತ ವಿರೋಧಿಯಾಗಿರುವ ಈ ಕಾಂಗ್ರೆಸ್ ಸರ್ಕಾರವನ್ನು(Congress Government) ಮುಂಬರುವ ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋಲಿಸಿ ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಮನವಿ ಮಾಡಿದರು.
ಬಿಜೆಪಿಯ ಬಳ್ಳಾರಿ ಪಾದಯಾತ್ರೆಯನ್ನುದ್ದೇಶಿಸಿ ಇಂದು ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ರೈತ ವಿರೋಧಿ ನೀತಿಗಳು ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ.ಗಳ ಬೃಹತ್ ಹಗರಣ ನಡೆದಿದ್ದು, ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಿದ್ದ ಹಣವನ್ನು ಲೂಟಿ ಮಾಡಲಾಗಿದೆ. ಇದರಿಂದ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಯಿತು ಎಂದು ವಿವರಿಸಿದರು.
ದಲಿತರ ಅಭಿವೃದ್ಧಿಗೆ ಕಡ್ಡಾಯವಾಗಿ ಮೀಸಲಿಡಬೇಕಾದ ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಲಾಗಿದೆ ಎಂದು ಟೀಕಿಸಿದರು. ಸರ್ಕಾರವು ಯಾವುದೇ ಹೊಸ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಕೇವಲ ಭ್ರμÁ್ಟಚಾರದಲ್ಲಿ ಮುಳುಗಿದೆ ಎಂದು ಖಂಡಿಸಿದರು.
ಜನಸಾಮಾನ್ಯರು ಮತ್ತು ರೈತರಿಗೆ ಆಗಿರುವ ಅನ್ಯಾಯ :
ಮೂಲಸೌಕರ್ಯಗಳ ಕೊರತೆ ಇವರ ಕೊಡುಗೆ. ಬಳ್ಳಾರಿ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿಲ್ಲ. ಶಾಲೆಗಳಲ್ಲಿ ಶಿಕ್ಷಕರಿಲ್ಲ ಹಾಗೂ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ವೈದ್ಯರಿಲ್ಲ. ಕೇಂದ್ರದ ಯೋಜನೆಗಳ ಕಡೆಗಣನೆ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಾಪಿಸಿದ ‘ಜನೌಷದಿ ಕೇಂದ್ರ’ಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.
ರೈತ ವಿರೋಧಿ ನಿಲುವು ಇವರದು. ಕಿಸಾನ್ ಸಮ್ಮಾನ್ ಯೋಜನೆಯಡಿ ಹಿಂದಿನ ಬಿಜೆಪಿ ಸರ್ಕಾರ (ಬಿ.ಎಸ್. ಯಡಿಯೂರಪ್ಪ) ರೈತರಿಗೆ ನೀಡುತ್ತಿದ್ದ 4,000 ರೂ. ಸಹಾಯಧನವನ್ನು ಈ ಸರ್ಕಾರ ಕಡಿತಗೊಳಿಸಿದೆ ಎಂದು ಆಕ್ಷೇಪಿಸಿದರು. ರೈತ ವಿದ್ಯಾನಿಧಿ, ಭಾಗ್ಯಲಕ್ಷ್ಮಿ ಯೋಜನೆ, ಹಾಗೂ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸುವ ಯೋಜನೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಆರೋಪಿಸಿದರು.
ಬರಗಾಲ ನಿರ್ವಹಣೆಯಲ್ಲಿ ವಿಫಲ :
ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ, ಮುಖ್ಯಮಂತ್ರಿಗಳು ಬೆಂಗಳೂರು ಬಿಟ್ಟು ಹೊರಬಂದು ರೈತರ ಕಣ್ಣೀರು ಒರೆಸುವ ಅಥವಾ ಪರಿಶೀಲನೆ ನಡೆಸುವ ಕೆಲಸ ಮಾಡುತ್ತಿಲ್ಲ ಎಂದರು. ರೈತರ ಜಮೀನುಗಳಿಗೆ ಟ್ರಾನ್ಸ್ಫಾರ್ಮರ್ ಅಳವಡಿಸಲು ಅಥವಾ ವಿದ್ಯುತ್ ಸಂಪರ್ಕ ಪಡೆಯಲು 2 ರಿಂದ 3 ಲಕ್ಷ ರೂ.ಗಳವರೆಗೆ ಲಂಚ ನೀಡಬೇಕಾದ ಭ್ರಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ವಿವರಿಸಿದರು. ಈ ಭ್ರಷ್ಟ, ಜನವಿರೋಧಿ ಸರಕಾರವನ್ನು ಕಿತ್ತೊಗೆಯಲು ಮನವಿ ಮಾಡಿದರು.

